ಫಲಿಸಿತು ಪ್ರಾರ್ಥನೆ | ಕೊನೆಗೂ ಕೊಳವೆ ಬಾವಿಯಿಂದ ಜೀವಂತವಾಗಿ ಹೊರ ಬಂದ ಸಾತ್ವಿಕ್ |
ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದ. ಈತನನ್ನು ಕೊನೆಗೂ ಯಶಸ್ವಿಯಾಗಿ ರಕ್ಷಣಾ ಕಾರ್ಯ ನಡೆಸಿ ಹೊರ ತರಲಾಗಿದೆ.
ಸತೀಶ್ ಮತ್ತು ಪೂಜಾ ದಂಪತಿಯ ಪುತ್ರ ಸಾತ್ವಿಕ್ ಮುಜಗೊಂಡ (2) ಎಂಬ ಬಾಲಕ ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದ.
ಶಂಕರಪ್ಪ ಮುಜಗೊಂಡ ಎಂಬುವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದರು. 500 ಅಡಿಯಷ್ಟು ಕೊರೆದರೂ ನೀರು ಬಂದಿರಲಿಲ್ಲ.
ಹಾಗಾಗಿ ಮುಚ್ಚದೇ ಹಾಗೆಯೇ ಬಿಟ್ಟಿದ್ದರು ಎನ್ನಲಾಗಿದೆ. ಅವರ ಮೊಮ್ಮಗನೇ ಈ ಕೊಳವೆ ಬಾವಿಗೆ ಬಿದ್ದಿದ್ದ.
ಸುಮಾರು 16 ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ಯಶಸ್ವಿಯಾಗಿ ಜೀವಂತವಾಗಿ ಹೊರ ತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ. ಸುಮಾರು 16 ಗಂಟೆಗೂ ಹೆಚ್ಚು ಕಾಲ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್ ಸಾವು ಗೆದ್ದು ಬಂದಿದ್ದಾನೆ. ಸುಮಾರು 20 ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ಹೊರೆತೆಗೆಯಲಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಗು ಬಿದ್ದ ಅರ್ಧ ಗಂಟೆಯಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ ಕಾರಣ ಮಗುವನ್ನು ರಕ್ಷಿಸಲು ಸಾಧ್ಯವಾಯಿತು. ಬುಧವಾರ ರಾತ್ರಿಯೇ ಹಿಟಾಚಿ ಮೂಲಕ ಕೊಳವೆಬಾವಿ ಪಕ್ಕದಲ್ಲಿ ಅಡ್ಡವಾಗಿ 3 ಅಡಿ ರಂಧ್ರ ಕೊರೆಯಲಾಯಿತು. ಆ ರಂಧ್ರದ ಮೂಲಕವೇ ಬಾಲಕ ಬಿದ್ದಿರುವ ಜಾಗಕ್ಕೆ ಹಗ್ಗದ ಮೂಲಕ ಒಂದು ಕ್ಯಾಮೆರಾ ಇಳಿಸಲಾಯಿತು. ಬಾಲಕನ ಚಲನವಲನದ ಮೇಲೆ ಕ್ಯಾಮೆರಾ ಮೂಲಕ ನಿಗಾ ಇರಿಸಿ, ನಿರಂತರವಾಗಿ ಆಕ್ಸಿಜನ್ ಪೂರೈಕೆ ಮಾಡಲಾಯಿತು. ಬಾಲಕನ ಕಾಲು ಅಲುಗಾಡುತ್ತಿರುವುದನ್ನು ಕ್ಯಾಮೆರಾ ಮೂಲಕ ಸೆರೆಹಿಡಿದ ಸಿಬ್ಬಂದಿಯು, ಕಾರ್ಯಾಚರಣೆಯನ್ನು ಇನ್ನಷ್ಟು ಕ್ಷಿಪ್ರಗೊಳಿಸಿ, ಕೊನೆಗೆ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಬುಧವಾರ ಸಂಜೆ 6 ಗಂಟೆಯಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡಗಳು ಸತತವಾಗಿ ಕಾರ್ಯಾಚರಣೆ ನಡೆಸಿ ಕೊನೆಗೂ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾತ್ವಿಕ್ ಬದುಕಿ ಬರಲಿ ಎಂದು ಗ್ರಾಮದಲ್ಲಿ ಹಾಗೂ ಸುತ್ತಮುತ್ತ ಜನ ದೇವಾಲಯಗಳಲ್ಲಿ ವಿಶೇಷ ಪೂಜೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದರು. ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಗೆ ಗ್ರಾಮದ ಯುವಕರಿಂದ ವಿಶೇಷ ಪೂಜೆ ನಡೆದಿತ್ತು. ಬಾಲಕ ಬದುಕಿ ಬರಲಿ ಎಂದು ಪೂಜೆ ಸಲ್ಲಿಸಿ ಯುವಕರು ಪ್ರಾರ್ಥನೆ ಸಲ್ಲಿಸಿದ್ದರು. ಬಾಲಕನ ತಂದೆ-ತಾಯಿಯಂತೂ ರಾತ್ರಿಯಿಡೀ ಕೊಳವೆಬಾವಿ ಪಕ್ಕದಲ್ಲೇ ಇದ್ದು ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಈಗ ಪ್ರಾರ್ಥನೆ ಫಲಿಸಿದ್ದು, ಬಾಲಕ ಆರೋಗ್ಯವಾಗಿದ್ದಾನೆ ಎಂದು ತಿಳಿದುಬಂದಿದೆ.
ಕೊಳವೆಬಾವಿಯ ಪಕ್ಕದಲ್ಲಿಯೇ ಆಂಬುಲೆನ್ಸ್ ನಿಂತಿದ್ದು, ವೈದ್ಯರು ವೈದ್ಯರು ಬಾಲಕನ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಸುಮಾರು 17 ಗಂಟೆಗೂ ಹೆಚ್ಚು ಕಾಲ ಮಗು ಕೊಳವೆಬಾವಿಯಲ್ಲಿಯೇ ಇದ್ದ ಕಾರಣ ಆತನ ಉಸಿರಾಟ ಸೇರಿ ಹಲವು ರೀತಿಯ ತಪಾಸಣೆ ಮಾಡಲಾಗುತ್ತದೆ. ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಮಗುವಿನ ಆರೋಗ್ಯ ತಪಾಸಣೆ ನಡೆದು, ಆರೋಗ್ಯ ದೃಢಪಡಿಸಿಕೊಂಡ ಬಳಿಕವೇ ಮಗುವನ್ನು ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ
Comments